ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ಇದೇ ನವೆಂಬರ್ 7(ಶನಿವಾರ)ರಂದು 3ನೇ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಹಾರ ರಾಜ್ಯದ ಜನತೆಗೆ ಬಹಿರಂಗ ಪತ್ರ ಬರೆದಿದ್ದಾರೆ.
ಬಿಹಾರದ ಅಭಿವೃದ್ಧಿಗಾಗಿ ನನಗೆ ರಾಜ್ಯದಲ್ಲಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಅವಶ್ಯಕತೆಯಿದೆ. ಬಿಹಾರದ ಜನತೆ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಸರ್ಕಾರವನ್ನು ಅಧಿಕಾರಕ್ಕೆ ತರುತ್ತಾರೆ ಎಂಬ ಭರವಸೆ ನನಗಿದೆ ಎಂದು ಮೋದಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜನರ ಅಭಿವೃದ್ಧಿಗಾಗಿ ನೀಡುವ ಹಣವನ್ನು ಕೊಳ್ಳೆ ಹೊಡೆಯುವ ದುಷ್ಟ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಬಿಹಾರದ ಭವಿಷ್ಯದ ಕುರಿತಾದ ನಮ್ಮ ಕನಸುಗಳಿಗೆ ಪೆಟ್ಟು ಬೀಳಲಿದೆ ಎಂದೂ ಪ್ರಧಾನಿ ಮೋದಿ ಪರೋಕ್ಷವಾಗಿ ಮಹಾಘಟಬಂಧನ್ ಮೈತ್ರಿಕೂಟವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಹಾರದ ಸರ್ವತೋಮುಖ ಬೆಳವಣಿಗೆಗಾಗಿ ನಾನು ನಿತೀಶ್ ಕುಮಾರ್ ಮುಖ್ಯಮಂತ್ರಿ ಗಾದಿಯ ಮೇಲೆ ಕೂರುವುದನ್ನು ನೋಡಲು ಬಯಸುತ್ತೇನೆ. ಈ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ತಮ್ದಮ ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಬಿಹಾರದಲ್ಲಿ 'ಜಂಗಲ್ ರಾಜ್' ಕೊನೆಗಾಣಿಸಿ ಜನಪರವಾದ ಆಡಳಿತಯ ನೀಡಿದ ಹೆಮ್ಮೆ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಸರ್ಕಾರಕ್ಕಿದ್ದು, ಈ ಬಾರಿಯೂ ಬಿಹಾರದ ಜನತೆ ಎನ್ಡಿಎ ಬೆಂಬಲಿಸಲಿದ್ದಾರೆ ಎಂಬ ಅಚಲ ವಿಶ್ವಾಸ ಇಟ್ಟುಕೊಂಡಿರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.
ಒಟ್ಟಿನಲ್ಲಿ ಮೂರನೇ ಹಂತದ ಮತದಾನಕ್ಕೆ ಸಜ್ಜಾಗುತ್ತಿರುವ ಬಿಹಾರದ ಜನತೆಗೆ ಬಹಿರಂಗ ಪತ್ರ ಬರೆದಿರುವ ಪ್ರಧಾನಿ ಮೋದಿ, ಅಭಿವೃದ್ಧಿಗಾಗಿ ಎನ್ಡಿಎ ಬೆಂಬಲಿಸಿ ಎಂದು ಕರೆ ನೀಡಿದ್ದಾರೆ.
……………..