Home> Karnataka
Advertisement

ಕೊಳ್ಳೇಗಾಲದಲ್ಲಿ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಬಹಿಷ್ಕಾರ ಪ್ರಕರಣ: 12 ಮಂದಿ ಬಂಧನ

ಗೋವಿಂದರಾಜು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹೂವಿನ ಕೊಪ್ಪಲು ಗ್ರಾಮದ ದಲಿತ ಜನಾಂಗಕ್ಕೆ ಸೇರಿದ ಪ್ರಕಾಶ್ ಎಂಬುವರ ಮಗಳಾದ ಶ್ವೇತಾ  ಜೊತೆ ಪರಸ್ಪರ ಪ್ರೀತಿಸಿ ಮನೆಯವರ ಸಮ್ಮುಖದಲ್ಲಿ 5  ವರ್ಷಗಳ ಹಿಂದೆ ಮಳವಳ್ಳಿಯ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿಕೊಂಡಿದ್ದರು.

ಕೊಳ್ಳೇಗಾಲದಲ್ಲಿ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಬಹಿಷ್ಕಾರ ಪ್ರಕರಣ: 12 ಮಂದಿ ಬಂಧನ

ಚಾಮರಾಜನಗರ: ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಮುಖಂಡರು ಅಮಾನವೀಯವಾಗಿ ನಡೆದುಕೊಂಡು ದಂಪತಿಗೆ ಬಹಿಷ್ಕಾರ ಹಾಕಿದ್ದ ಘಟನೆಗೆ ಸಂಬಂದಿಸಿದಂತೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಅಗರ-ಮಾಂಬಳ್ಳಿ ಪೊಲೀಸರು ಮುಖಂಡರುಗಳಾದ ವೆಂಕಟಶೆಟ್ಟಿ, ಮಹದೇವ, ಕಣ್ಣಪ್ಪ ಸೇರಿದಂತೆ ಒಟ್ಟು 12 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. 

ಏನಿದು ಬಹಿಷ್ಕಾರ ಪ್ರಕರಣ?
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಣಗಳ್ಳಿಯಲ್ಲಿ ಪ್ರೇಮಿಗಳಿಬ್ಬರು ಅಂತರ್ ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಯಜಮಾನರು 3 ಲಕ್ಷ ದಂಡ ಹಾಕಿ ಗ್ರಾಮದಿಂದ ಹೊರ ಉಳಿಯುವಂತೆ ಬಹಿಷ್ಕಾರ ಹಾಕಿದ್ದಾರೆ ಎಂದು ಕೊಳ್ಳೇಗಾಲ ಡಿ.ವೈ.ಎಸ್.ಪಿ ಕಚೇರಿಗೆ  ಗೋವಿಂದರಾಜು ಹಾಗೂ ಶ್ವೇತಾ ದೂರು ಕೊಟ್ಟು ಅಳಲು ತೋಡಿಕೊಂಡಿದ್ದರು.

ಗೋವಿಂದರಾಜು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹೂವಿನ ಕೊಪ್ಪಲು ಗ್ರಾಮದ ದಲಿತ ಜನಾಂಗಕ್ಕೆ ಸೇರಿದ ಪ್ರಕಾಶ್ ಎಂಬುವರ ಮಗಳಾದ ಶ್ವೇತಾ  ಜೊತೆ ಪರಸ್ಪರ ಪ್ರೀತಿಸಿ ಮನೆಯವರ ಸಮ್ಮುಖದಲ್ಲಿ 5  ವರ್ಷಗಳ ಹಿಂದೆ ಮಳವಳ್ಳಿಯ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿಕೊಂಡಿದ್ದರು.

ಇದನ್ನೂ ಓದಿ- ಎಲ್ಲ ಧರ್ಮಗಳು ಒಳ್ಳೆಯ ಉದ್ದೇಶಕ್ಕಾಗಿಯೇ ಹುಟ್ಟಿಕೊಂಡಿವೆ: ಸಿಎಂ ಬೊಮ್ಮಾಯಿ‌

ಗೋವಿಂದರಾಜು ಮಳವಳ್ಳಿಯಲ್ಲಿ ಮನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಆಗಾಗ ಗೋವಿಂದರಾಜು ಹಾಗೂ ಶ್ವೇತ ಕುಣಗಳ್ಳಿ ಗ್ರಾಮಕ್ಕೆ ಬಂದು ಹೋಗುತ್ತಿದ್ದು ಐದು ವರ್ಷದಿಂದ  ಒಟ್ಟಿಗೆ ಜೀವನ ನಡೆಸುತ್ತಿದ್ದಾರೆ. ಗೋವಿಂದರಾಜು ಅವರ ಮನೆಯಲ್ಲಿ ಅಂತರ್ ಜಾತಿ ವಿವಾಹ ತಿಳಿದಿದ್ದರೂ ಸಹ ಮನೆಯವರು ಯಾರು ಸಹ ತೊಂದರೆ ನೀಡಲಿಲ್ಲ. ತಿಂಗಳಿಗೆ 2 ರಿಂದ 3 ಬಾರಿ ಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಆದರೆ ಗೋವಿಂದರಾಜು ಅವರ ಅಕ್ಕಪಕ್ಕದ ನಿವಾಸಿಗಳು ಅಂತರ್ ಜಾತಿ ವಿವಾಹದ ಬಗ್ಗೆ ಮಾಹಿತಿಯನ್ನು ಪಡೆದು ಶ್ವೇತಾ ನಮ್ಮ ಜಾತಿಯವಳಲ್ಲ, ಅವಳು ದಲಿತ ಜನಾಂಗಕ್ಕೆ ಸೇರಿದವಳು ಎಂದು ಪಕ್ಕದ ಮನೆಯವರಾದ ಜಯಲಕ್ಷ್ಮಿ, ಮಧು, ರಂಗಸ್ವಾಮಿ, ಕುಳ್ಳ, ಮಹದೇವಪ್ಪ ಮಹದೇವ ಶೆಟ್ಟಿ ಇವರುಗಳು ಗ್ರಾಮದ ಯಜಮಾನರುಗಳಿಗೆ ಮಾಹಿತಿ ನೀಡಿ ಎರಡರಿಂದ ಮೂರು ಬಾರಿ ಪಂಚಾಯಿತಿ ನಡೆಸಿ ದಂಡ ಕಟ್ಟಬೇಕು ಎಂದು  ಸೂಚಿಸಿದ್ದರು.

ದಂಡ ಕಟ್ಟದಿದ್ದಲ್ಲಿ ದಂಪತಿಗಳು ಅಂಗಡಿಗಳಲ್ಲಿ ಅಕ್ಕಿ, ತರಕಾರಿ,  ಹಾಲು ನೀಡುವುದಿಲ್ಲ ನೀರನ್ನು ಸಹ ತೆಗೆದುಕೊಳ್ಳುವಂತಿಲ್ಲ ಎಂದು ಮುಖಂಡರು ತೀರ್ಪು ನೀಡಿದ್ದರು. ಗ್ರಾಮದ ಯಜಮಾನರಾದ ವೆಂಕಟಶೆಟ್ಟಿ ,ಮಹದೇವ, ಮೊಂಡಶೆಟ್ಟಿ, ಕಣ್ಣಪ್ಪ, ನಂಜಶೆಟ್ಟಿ, ಮಹದೇವ ಶೆಟ್ಟಿ, ಸಿದ್ದೇಶ್, ಪಂಚಾಯಿತಿ ಮಾಡಿ ನೀವು ತಪ್ಪು ಮಾಡಿದ್ದೀರಾ ಆ ಕಾರಣ 3 ಲಕ್ಷ ದಂಡ ಕಟ್ಟಬೇಕು  ಎಂದು ಯಜಮಾನರು ಮಾರ್ಚ್ 1 ರಂದು ಕೊನೆಯ ದಿನಾಂಕ ನೀಡಿದ್ದರು.

ಇದಲ್ಲದೆ, ನೀವು ದಂಡ ಕಟ್ಟಿದರು ಸಹ ನಿಮ್ಮ ಸೊಸೆ, ಮಗ ಗ್ರಾಮಕ್ಕೆ ಪ್ರವೇಶ ಮಾಡುವಂತಿಲ್ಲ. ನೀವು ಅವರ ಜೊತೆ ಮಾತನಾಡುವಂತಿಲ್ಲ.  ಈಗ 3 ಲಕ್ಷ ಕಟ್ಟಿದರೆ ಗ್ರಾಮದವರು ಎಂದಿನಂತೆ ನಿಮ್ಮನ್ನು ಮಾತನಾಡಿಸುತ್ತಾರೆ ಎಂದು ಬಹಿಷ್ಕಾರ ಹಾಕಿದ್ದರು. ತಮ್ಮ ಮಾವನವರು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ ಅವರ ಬಳಿ 3 ಲಕ್ಷ ಇಲ್ಲ.  ಹಾಗಾಗಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಈ ದಂಪತಿಗಳು ಡಿ.ವೈ.ಎಸ್.ಪಿಗೆ  ದೂರು ನೀಡಿದ ಮಾಹಿತಿ ತಿಳಿದು ಮತ್ತೇ 3 ಲಕ್ಷ ರೂ. ದಂಡ ಹಾಕಿ ಅಮಾನವೀಯ ವರ್ತನೆ ತೋರಿದ್ದರು.

ಇದನ್ನೂ ಓದಿ- Puttanna : ಕಮಲ ಬಿಟ್ಟು ಕೈ ಹಿಡಿದ ಪುಟ್ಟಣ್ಣ : 'ಶಿಕ್ಷಕರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲಿಲ್ಲ'

ಈ ಸಂಬಂಧ ಕೊಳ್ಳೇಗಾಲ ಡಿವೈಎಸ್ಪಿ ದೂರು ಪಡೆದು ಮಾಂಬಳ್ಳಿ ಪೊಲೀಸರಿಗೆ ಎಸ್ಸಿಎಸ್ಟಿ ದೌರ್ಜನ್ಯದಡಿ ಪ್ರಕರಣ ದಾಖಲಿಸುವಂತೆ ಸೂಚಿಸಿ ತನಿಖೆ ಕೈಗೊಂಡಿದ್ದರು. ಅದರಂತೆ, ಈಗ 12 ಮಂದಿ ಬಂಧನವಾಗಿದೆ.

ದಂಪತಿಗೆ 1 ಲಕ್ಷ ಪರಿಹಾರ: 
ಅಂತರ್ಜಾತಿ ವಿವಾಹವಾಗಿರುವ ಕೊಳ್ಳೇಗಾಲ ತಾಲ್ಲೂಕಿನ  ಕುಣಗಳ್ಳಿ ಗ್ರಾಮದ ಗೋವಿಂದರಾಜು ಹಾಗೂ ಶ್ವೇತ ದಂಪತಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂತ್ರಸ್ತರ ಪರಿಹಾರದ 1 ಲಕ್ಷದ ಚೆಕ್ ಅನ್ನು ತಹಶೀಲ್ದಾರ್  ಮಂಜುಳಾ  ವಿತರಣೆ ಮಾಡಿದ್ದಾರೆ.

ಬಹಿಷ್ಕಾರಕ್ಕೆ ಒಳಗಾಗಿದ್ದ ಕುಟುಂಬಕ್ಕೆ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂತ್ರಸ್ತರಿಗೆ 2 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದ್ದು ಮೊದಲ ಹಂತವಾಗಿ 1 ಲಕ್ಷದ ಚೆಕ್ ಅನ್ನು ವಿತರಣೆ ಮಾಡಲಾಗಿದೆ. ಯಾರೂ ಸಹ ಭಯಪಡುವಂತಿಲ್ಲ, ದಂಪತಿಯ ಕುಟುಂಬದ ಜೊತೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಇದೆ ಎಂದು ತಹಶಿಲ್ದಾರ್, ಸಮಾಜ ಕಲ್ಯಾಣ ಇಲಾಖೆ ಡಿಡಿ‌ ಮಲ್ಲಿಕಾರ್ಜುನ ಧೈರ್ಯ ತುಂಬಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More