Home> Karnataka
Advertisement

ಸಚಿವ ಸಂಪುಟ ವಿಸ್ತರಣೆ ಅಮಿತ್ ಶಾ ಅಸ್ತು; ಮಂಗಳವಾರಕ್ಕೆ ಮುಹೂರ್ತ ಫಿಕ್ಸ್

ಆಗಸ್ಟ್ 20ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸಭೆಯ ಸಮ್ಮೇಳನ ಸಭಾಂಗಣದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಂದು ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆ ಆಗಲಿದೆ.

ಸಚಿವ ಸಂಪುಟ ವಿಸ್ತರಣೆ  ಅಮಿತ್ ಶಾ ಅಸ್ತು; ಮಂಗಳವಾರಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗ್ರೀನ್ ಸಿಗ್ನಲ್ ನೀಡಿದ್ದು, ಆಗಸ್ಟ್ 20ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ. 

ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯು ಅಧಿಕೃತ ಮಾಹಿತಿ ನೀಡಿದ್ದು, "ಆಗಸ್ಟ್ 20ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸಭೆಯ ಸಮ್ಮೇಳನ ಸಭಾಂಗಣದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಂದು ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆ ಆಗಲಿದೆ" ಎಂದು ಹೇಳಿದೆ.

ಶನಿವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ಮಾಡಿದ ಸಿಎಂ ಯಡಿಯೂರಪ್ಪ ಅವರು, ರಾಜ್ಯದ ನೆರೆ ಪರಿಸ್ಥಿತಿ ಹಾಗೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವ ಸಂಪುಟದ ಅರ್ಧ ಸಂಖ್ಯೆಯಷ್ಟು ಸ್ಥಾನಗಳನ್ನು ಮಾತ್ರ ಭಾರ್ತಿ ಮಾಡಲು ಶಾ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಸಚಿವ ಸ್ಥಾನದಿಂದ ವಂಚಿತರಾಗಿ ಬಂಡಾಯ ಏಳುವ ಶಾಸಕರನ್ನು ಸಮಾಧಾನ ಪಡಿಸುವ ಉದ್ದೇಶದಿಂದ ಅಂದೇ ನಿಗಮ ಮಂಡಳಿಗಳಿಗೆ ಅಧ್ಯಕ್ಷ ಸ್ಥಾನಗಳಿಗೆ ನಾಮನಿರ್ದೇಶನ ಮಾಡಲು ಶಾ ಅನಮತಿ ನೀಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವಿಕರಿಸಿದ 22 ದಿನಗಳ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು, 34 ಸಚಿವರ ಬಲದ ಸಂಪುಟದಲ್ಲಿ ಮೊದಲ ಹಂತದಲ್ಲಿ 12 ರಿಂದ 15 ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ ಎನ್ನಲಾಗಿದೆ. 
 

Read More